ಅಧ್ಯಾಯ-2
ಶ್ಲೋಕ – 53
ಶ್ರುತಿವಿಪ್ರತಿಪನ್ನಾ ತೇ ಯದಾ ಸ್ಥಾಸ್ಯತಿ ನಿಶ್ಚಲಾ।
ಸಮಾಧಾವಚಲಾ ಬುದ್ಧಿಸ್ತದಾ ಯೋಗಮವಾಪ್ಸ್ಯಸಿ ॥೫೩॥
ಶ್ರುತಿ ವಿಪ್ರತಿಪನ್ನಾ ತೇ ಯದಾ ಸ್ಥಾಸ್ಯತಿ ನಿಶ್ಚಲಾ ಸಮಾದೌ ಅಚಲಾ ಬುದ್ಧಿಃ ತದಾ ಯೋಗಮ್ ಅವಾಪ್ಸ್ಯಸಿ- ಮೊದಲು ಶ್ರುತಿಗಳಿಗೆ ಹೊಂದಿಕೊಳ್ಳದಿದ್ದ,[ಮತ್ತೆ ಶ್ರುತಿಗಳಿಂದ ಶ್ರುತಿಗೂಡಿದ,] ನಿನ್ನ ಬುದ್ಧಿ ಎಂದು ನಿಜದ ಅರಿವಿನಿಂದ ಗಟ್ಟಿಗೊಂಡು, ಸಮಾಧಿಯಲ್ಲಿ ನಲುಗದೆ ನಿಲ್ಲುವುದೋ, ಅಂದು ಗುರಿ ತಲುಪುವೆ.
ಇಲ್ಲಿ ‘ವಿಪ್ರತಿಪನ್ನಾ’ ಅಂದರೆ ‘ಅಭಿಪ್ರಾಯಭೇದ’. ಮೊದಲು ಶ್ರುತಿಗಳಿಂದ (ಶ್ರವಣದಿಂದ) ಗೊಂದಲವೆನಿಸುತ್ತದೆ. ನಂತರ ಅಲ್ಲಿಂದ ವೇದಕ್ಕೆ ಹೋದಾಗ-ವೇದದಲ್ಲಿ ಹೇಳಿದ ಸಂಗತಿಗೆ ಮನಸ್ಸು ವಿರುದ್ಧವಾಗಿ ಯೋಚಿಸುತ್ತದೆ. ಆದರೆ ಒಮ್ಮೆ ಮನಸ್ಸು ತಿಳಿಯಾದಾಗ, ಶ್ರುತಿಯಲ್ಲಿ ಹೇಳಿದ ತ್ರಿಗುಣಾತೀತ ತತ್ವದಲ್ಲಿ ಮನಸ್ಸು ಗಟ್ಟಿಯಾಗಿ ಕುಳಿತುಕೊಳ್ಳುತ್ತದೆ. ಮೊದಲು ತ್ರೈಗುಣ್ಯ ವಿಷಯವಾಗಿದ್ದು ನಂತರ ತ್ರೈಗುಣ್ಯದ ವಿಷವನ್ನು ಪರಿಹರಿಸುವಂತಾಗುತ್ತದೆ (ಯಾಪಯತಿ). ಒಮ್ಮೆ ಮನಸ್ಸು ನಿರ್ಮಲವಾದಾಗ ಅದು ವೇದಕ್ಕೆ ಶ್ರುತಿಗೂಡು(Tune)ತ್ತದೆ. ಅದರಿಂದಾಗಿ ವೇದದಲ್ಲಿ ಹೇಳಿರುವ ವಿಚಾರ ಮತ್ತು ನಮ್ಮ ಯೋಚನೆಗಳಲ್ಲಿ ಯಾವುದೇ ವೆತ್ಯಾಸ ಕಾಣುವುದಿಲ್ಲ. ಮನಸ್ಸು ವೈದಿಕ ವಾಙ್ಮಯದಲ್ಲಿ ನೆಲೆ ನಿಲ್ಲುತ್ತದೆ. ಈ ಸ್ಥಿತಿಯಲ್ಲಿ ಧ್ಯಾನ(Meditation) ಮಾಡಿದರೆ ಮನಸ್ಸು ಸದಾ ಭಗವಂತನಲ್ಲಿ ನೆಲೆಗೊಳ್ಳುತ್ತದೆ. ಇದಕ್ಕೂ ಮುಂದೆ ಹೋಗಿ ನಿಶ್ಚಲವಾದ ಸಮಾಧಿ ಸ್ಥಿತಿಯಲ್ಲಿ, ಸ್ವರೂಪ ಚಿಂತನದಲ್ಲಿ ನೋಡಿದಾಗ- ಭಗವಂತನ ನಿಜವಾದ ರೂಪ ಸಾಕ್ಷಾತ್ಕಾರವಾಗುತ್ತದೆ. ಈ ಸ್ಥಿತಿಯಲ್ಲಿ ಮನಸ್ಸು ಕೆಲಸ ಮಾಡುವುದಿಲ್ಲ-ಆತ್ಮ ಕೆಲಸ ಮಾಡುತ್ತಿರುತ್ತದೆ. ಆತ್ಮದ ಕಣ್ಣಿನಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ-ಇದು ಸಾಧನೆಯ ಪೂರ್ಣ ಫಲ.

[…] […]