ಭಗವದ್ಗೀತೆ ಅಧ್ಯಾಯ – 3 (ಕರ್ಮ ಯೋಗ)
ಶ್ಲೋಕ – 24
ಉತ್ಸೀದೇಯುರಿಮೇ ಲೋಕಾ ನ ಕುರ್ಯಾಂ ಕರ್ಮ ಚೇದಹಮ್ ।
ಸಂಕರಸ್ಯ ಚ ಕರ್ತಾ ಸ್ಯಾಮುಪಹನ್ಯಾಮಿಮಾಃ ಪ್ರಜಾಃ ॥೨೪॥
ನಾನು ಕರ್ಮ ಮಾಡದೇ ಇದ್ದರೆ ಈ ಜನರೆಲ್ಲಾ ದಾರಿ ತಪ್ಪಿ ಹಾಳಾಗುತ್ತಾರೆ.
ಧರ್ಮದ ಕಲಬೆರೆಕೆಗೆ ಕಾರಣನಾಗಿ ಈ ಎಲ್ಲ ಜನತೆಯನ್ನು ನಾನೆ ಕೈಯಾರ ಕೆಡವಿದಂತಾದೀತು.
ಈ ಮೇಲಿನ ಮೂರು ಶ್ಲೋಕದಲ್ಲಿ ಕೃಷ್ಣ ತನ್ನನ್ನೇ ತಾನು ಉದಾಹರಣೆಯಾಗಿಟ್ಟುಕೊಂಡು ಹಿಂದೆ ಹೇಳಿದ ವಿಷಯವನ್ನು ವಿವರಿಸುತ್ತಾನೆ. ಅರ್ಜುನನ ಸಾರಥಿಯಾಗಿ ನಿಂತಿರುವ ಕೃಷ್ಣ ಹೇಳುತ್ತಾನೆ- “ನನಗೆ ಏನಾದರೂ ಮಾಡಬೇಕಾದ್ದು ಅಥವಾ ಮಾಡದೇ ಇದ್ದರೆ ತೊಂದರೆ ಆಗುವಂಥದ್ದು ಏನೂ ಇಲ್ಲ, ಆದರೆ ನಾನು ಕರ್ತವ್ಯ ಕರ್ಮದಲ್ಲಿ ನಿಂತಿದ್ದೇನೆ” ಎಂದು. ಮೂರು ಲೋಕದಲ್ಲಿ, ಸೃಷ್ಠಿ-ಸ್ಥಿತಿ-ಸಂಹಾರವನ್ನು ತನ್ನ ನಿತ್ಯ ಕರ್ಮವಾಗಿ ಮಾಡುತ್ತಿರುವ ಭಗವಂತ, ಎಲ್ಲವನ್ನು ತನ್ನ ಪ್ರೀತಿಯ ಭಕ್ತರಿಗಾಗಿ, ಜೀವಜಾತಕ್ಕಾಗಿ ಮಾಡುತ್ತಿದ್ದಾನೆಯೇ ಹೊರತು ಇನ್ನೇನೋ ಲಾಭಕ್ಕಾಗಿ ಅಲ್ಲ.
ಒಂದು ವೇಳೆ ಕೃಷ್ಣ ತನ್ನನ್ನು ನಿತ್ಯ ಕರ್ಮದಲ್ಲಿ ತೊಡಗಿಸಿಕೊಳ್ಳದೆ ಇದ್ದಿದ್ದರೆ ಎಲ್ಲರೂ ಆತನನ್ನು ಪ್ರಮಾಣವಾಗಿರಿಸಿಕೊಂಡು ಆತನ ದಾರಿಯನ್ನು ಹಿಡಿಯುತ್ತಿದ್ದರು. ಈ ಕಾರಣಕ್ಕಾಗಿ ಭಗವಂತ ಅವತಾರ ತಾಳಿದಾಗ ಒಬ್ಬ ಸಾಮಾನ್ಯ ಮಾನವನಂತೆ ಕಾಣಿಸಿಕೊಂಡು, ತನ್ನ ನಿತ್ಯ ಕರ್ಮಗಳನ್ನು ಆದರ್ಶವಾಗಿ ಜನತೆ ಪಾಲಿಸುವಂತೆ ಕರ್ತವ್ಯ ಕರ್ಮವನ್ನು ನಿರ್ವಹಿಸುತ್ತಾನೆ. ಕೃಷ್ಣಾವತಾರದಲ್ಲಿ ನೋಡಿದರೆ ಕೃಷ್ಣ ಸಂಧ್ಯಾವಂದನೆ ಇತ್ಯಾದಿ ಮೂಲ ಕರ್ಮವನ್ನು ತಪ್ಪದೆ ಮಾಡುತ್ತಿದ್ದ. ಇದು ಆತನಿಗೊಸ್ಕರವಲ್ಲ, ಆತನನ್ನು ಹಿಂಬಾಲಿಸುವ ಜನರಿಗೆ ಮಾರ್ಗದರ್ಶನಕ್ಕೋಸ್ಕರ.
ಕೃಷ್ಣ ಹೇಳುತ್ತಾನೆ “ನಾನು ಕರ್ಮ ಮಾಡದೇ ಇದ್ದರೆ ಇಡೀ ಲೋಕ ಕರ್ಮ ಪ್ರಜ್ಞೆಯನ್ನು ಕಳೆದುಕೊಂಡು ದಾರಿತಪ್ಪಿಬಿಡುತ್ತದೆ, ಸ್ವಚ್ಛಂದತೆ ಬಂದು ನಿರ್ದಿಷ್ಟ ವ್ಯವಸ್ಥೆ ಹೊರಟು ಹೋಗುತ್ತದೆ” ಎಂದು. ಯಾರಿಗೆ ಯಾವುದು ಧರ್ಮವೋ ಅದನ್ನು ಮಾಡಲೇ ಬೇಕು. ಅದೊಂದು ವ್ಯವಸ್ಥೆ. ಇಲ್ಲದಿದ್ದರೆ ಎಲ್ಲರೂ ತಮಗೆ ತೋಚಿದಂತೆ ಮಾಡಲಾರಂಭಿಸಿಬಿಡುತ್ತಾರೆ. “ಇದರಿಂದ ಅವ್ಯವಸ್ಥೆ ತಾಂಡವವಾಡುತ್ತದೆ ಹಾಗು ಅದಕ್ಕೆ ಜವಾಬ್ದಾರಿ ನಾವಾಗುತ್ತೇವೆ” ಎನ್ನುತ್ತಾನೆ ಕೃಷ್ಣ.
ಸಾರಾಂಶ:
ಮಹಾನ್ ವ್ಯಕ್ತಿಯೊಬ್ಬನು ಕರ್ಮವಿಲ್ಲದ ಜೀವನ ನಡೆಸಿದರೆ, ಜನಸಾಮಾನ್ಯರು ಧರ್ಮದಿಂದ ದೂರವಾಗಿ, ಅಧರ್ಮದಲ್ಲಿ ನಿಲುಕುತ್ತಾರೆ. ಹೀಗಾಗಿ, ಜ್ಞಾನಿಯಾದವನು ತಾನೇ ಏನೂ ಬೇಡವೆಂದು ತೊರೆದುಬಿಟ್ಟರೂ, ಲೋಕದ ಸತ್ತ್ವ ರಕ್ಷಣೆಗಾಗಿ, ಧರ್ಮ ಸ್ಥಾಪನೆಯ, ಕರ್ಮಮಾರ್ಗದಲ್ಲಿ ತೊಡಗಿರಬೇಕು.
ಇದು ಗೀತೆಯಲ್ಲಿ “ಲೋಕಸಂಗ್ರಹ” ಎಂಬ ಮಹಾತತ್ತ್ವದ ಅಡಿಯಲ್ಲಿ ಬರುತ್ತದೆ — ಅಂದರೆ, ಸಮಾಜದ ಸಮಗ್ರ ನಿಕಾಯದ ಒಳಿತಿಗಾಗಿ, ಜ್ಞಾನಿಯು ಕೂಡ ಕರ್ಮದಾರಿಯಾಗಿರಬೇಕು.

[…] […]