ಶ್ಲೋಕ – 01
ಅರ್ಜುನ ಉವಾಚ ।
ಸಂನ್ಯಾಸಂ ಕರ್ಮಣಾಂ ಕೃಷ್ಣ ಪುನರ್ಯೋಗಂ ಚ ಶಂಸಸಿ ।
ಯಚ್ಛ್ರೇಯ ಏತಯೋರೇಕಂ ತನ್ಮೇ ಬ್ರೂಹಿ ಸುನಿಶ್ಚಿತಮ್ ।।
ನಾಲ್ಕನೆ ಅಧ್ಯಾಯದಲ್ಲಿ ಕೃಷ್ಣ ಕರ್ಮಯೋಗದ ಬಗ್ಗೆ ಹೇಳಿದ ಹಾಗು ಕೊನೆಯಲ್ಲಿ ಕರ್ಮಸನ್ಯಾಸದ ಬಗ್ಗೆಯೂ ಹೇಳಿದ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. ಇದನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳಬೇಕಾದರೆ ಮೊದಲು ಕರ್ಮಯೋಗ ಮತ್ತು ಕರ್ಮಸಂನ್ಯಾಸ ಅಂದರೆ ಏನು ಎಂದು ತಿಳಿಯಬೇಕು. ಮೇಲ್ನೋಟಕ್ಕೆ ನಮಗೆ ಕರ್ಮಸಂನ್ಯಾಸ ಅಂದರೆ ‘ಕರ್ಮತ್ಯಾಗ‘ ಎನ್ನುವಂತೆ ಕಾಣುತ್ತದೆ. ಆದರೆ ಕೃಷ್ಣ ನಾಲ್ಕನೇ ಅಧ್ಯಾಯದ ಕೊನೆಯಲ್ಲಿ “ಎದ್ದು ನಿಲ್ಲು- ಯುದ್ಧ ಮಾಡು” ಎಂದು ಅರ್ಜುನನನ್ನು ಕರ್ಮ ಮಾಡುವಂತೆ ಹುರಿದುಂಬಿಸಿದ್ದನ್ನು ನಾವು ಕಂಡಿದ್ದೇವೆ. ಇದರಿಂದ ಕರ್ಮಸಂನ್ಯಾಸ ಅಂದರೆ ಕರ್ಮತ್ಯಾಗವಲ್ಲ ಎನ್ನುವುದು ನಮಗೆ ಸ್ಪಷ್ಟವಾಗುತ್ತದೆ. ಶಾಸ್ತ್ರೀಯವಾಗಿ ಕರ್ಮಸಂನ್ಯಾಸ ಎಂದರೆ ದ್ವಂದ್ವಾತೀತವಾಗಿ, ಕರ್ಮಫಲದ ಬಯಕೆಯಿಲ್ಲದೆ-ಕರ್ಮ ಮಾಡುವುದು. ಇಲ್ಲಿ ರಾಗ-ದ್ವೇಷಗಳಿಗೆ, ಕಾಮ-ಕ್ರೋಧಗಳಿಗೆ ಎಡೆಯಿಲ್ಲ. ಈ ಬಗ್ಗೆಯೂ ವಿಶೇಷವಾಗಿ ಕೃಷ್ಣ ಹಿಂದೆ ವಿವರಿಸಿದ್ದ. ಆದ್ದರಿಂದ ಕರ್ಮಸಂನ್ಯಾಸ ಎಂದರೆ ಕರ್ಮವನ್ನು ಬಿಡುವುದಲ್ಲ, ಕರ್ಮದಲ್ಲಿ ಕಾಮ ಕ್ರೋಧಗಳನ್ನು ಬಿಡುವುದು. “ಕಾಮಕ್ರೋಧಗಳ ಅತೀತನಾಗಿ ಯುದ್ಧಮಾಡು ಮತ್ತು ಜ್ಞಾನಯೋಗದ ದಾರಿಯಲ್ಲಿ ನಡೆ” ಎನ್ನುವುದು ಅರ್ಜುನನಿಗೆ ಕೃಷ್ಣನ ಸಂದೇಶ. ಆದರೆ ಕಾಮ-ಕ್ರೋಧಗಳ ಅತೀತನಾಗಿ ಜ್ಞಾನಮಾರ್ಗದಲ್ಲಿ ಯುದ್ಧ ಮಾಡುವುದು ಹೇಗೆ? ಇದನ್ನು ಅರ್ಥ ಮಾಡಿಕೊಳ್ಳುವುದು ನಮಗೆ ಸ್ವಲ್ಪ ಕಷ್ಟ. ಈ ಕುರಿತು ಅರ್ಜುನ ಕೃಷ್ಣನಲ್ಲಿ ವಿವರಣೆಯನ್ನು ನಮ್ಮ ನಿಮ್ಮೆಲ್ಲರ ಪರವಾಗಿ ಕೇಳುವುದರೊಂದಿಗೆ ಐದನೇ ಅಧ್ಯಾಯ ಆರಂಭವಾಗುತ್ತದೆ. ಈ ಅಧ್ಯಾಯದಲ್ಲಿ ಕರ್ಮಸಂನ್ಯಾಸದ ಬಗ್ಗೆ ವಿಶೇಷವಾದ ವಿವರಣೆಯನ್ನು ಕೃಷ್ಣ ನಮ್ಮ ಮುಂದಿಟ್ಟಿದ್ದಾನೆ.
