ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ (ಒಎಸ್ಡಿ) ಶನಿವಾರ ಸಂಜೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸರು ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಇಂಧನ ಸಚಿವರ ಒಎಸ್ಡಿ ಜ್ಯೋತಿ ಪ್ರಕಾಶ್ (50) ಮತ್ತು ಅವರ ಕಾರು ಚಾಲಕ ನವೀನ್ ಎಂ (34) ಅವರನ್ನು ಲಂಚ ಸ್ವೀಕರಿಸುವ ವೇಳೆ ಬಂಧಿಸಲಾಗಿದೆ.
ಇದನ್ನು ಓದಿ: ಎನ್ಸಿಇಆರ್ಟಿ ಹೊಸ ಪಾಠ್ಯಕ್ರಮ: ಸ್ವದೇಶಿ ಚಳವಳಿಯ ಕುರಿತ ಎರಡು ಪಾಠಗಳು ಪಠ್ಯಪುಸ್ತಕಗಳಲ್ಲಿ ಸೇರಿಕೆ
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ (37) ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿದ್ಯುತ್ ಮಂಜೂರಾತಿಗೆ ಸಂಬಂಧಿಸಿದಂತೆ ಡಿಆರ್ ಡೆವಲಪರ್ ಕಂಪನಿಗೆ ಎನ್ಒಸಿ ನೀಡಲು ಲಂಚ ಬೇಡಿಕೆ ಇಟ್ಟಿದ್ದಾರೆ ಎಂಬುದು ದೂರುದ ಅಂಶ.
ಆರಂಭದಲ್ಲಿ ₹1 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪಿಗಳು, ನಂತರ ₹50,000ಕ್ಕೆ ಒಪ್ಪಿಕೊಂಡು ಹಣ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ತನಿಖಾಧಿಕಾರಿಗಳು ಇಬ್ಬರನ್ನೂ ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
