ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ‘ಜಾತಿ ಗಣತಿ’ ಸಮೀಕ್ಷೆಯ ಅವಧಿ ವಿಸ್ತರಣೆಯ ಬಗ್ಗೆ ನಾಳೆ ಸಂಜೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು, ಶೇ.63 ರಷ್ಟು ಸರ್ವೇ ಕಾರ್ಯ ಮುಗಿದಿದೆ. ನಾಳೆ ಸಂಜೆವರೆಗೆ ಪ್ರಗತಿಯನ್ನು ಪರಿಶೀಲಿಸಿ, ಅವಧಿ ವಿಸ್ತರಣೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು,” ಎಂದು ಹೇಳಿದರು.
ಮುಖ್ಯಮಂತ್ರಿಗಳು ಕೇಂದ್ರ ಸಚಿವ ಸೋಮಣ್ಣ ಅವರ “ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ” ಎಂಬ ಆರೋಪವನ್ನು ತಿರಸ್ಕರಿಸಿ, “ಅದು ಬಾಲಿಶ ಹೇಳಿಕೆ. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಯನ್ನು ಅರಿಯುವ ಉದ್ದೇಶದಿಂದಲೇ ಈ ಸಮೀಕ್ಷೆ ನಡೆಯುತ್ತಿದೆ. ಯಾವುದೇ ಜಾತಿಯನ್ನು ತುಳಿಯುವ ಪ್ರಶ್ನೆಯೇ ಇಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಜನರ ಮನಸ್ಸು ಗೊಂದಲಗೊಳಿಸುತ್ತಿದ್ದಾರೆ,” ಎಂದು ಹೇಳಿದರು.1
ಇದನ್ನು ಓದಿ: 85 ಕ್ರೀಡಾ ಮೂಲಸೌಕರ್ಯ ನಿರ್ಮಾಣ; ಕರ್ನಾಟಕದಲ್ಲಿ ಮೈಲಿಗಲ್ಲು ಸಾಧಿಸಿದ ಗ್ಯಾಲಂಟ್ ಸ್ಪೋರ್ಟ್ಸ್
ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿರುವುದನ್ನು ಅವರು ಶ್ಲಾಘಿಸಿದರು. “ಸಮಾಜದಲ್ಲಿ ಬದಲಾವಣೆ ಬಯಸದವರು ಸಮೀಕ್ಷೆಯ ವಿರುದ್ಧ ಮಾತನಾಡುತ್ತಿದ್ದಾರೆ. ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ತಮ್ಮ ನಿಲುವನ್ನು ಸ್ವಯಂಪ್ರೇರಣೆಯಿಂದ ದಾಖಲಿಸುತ್ತಿದ್ದಾರೆ. ಜನರ ಅಭಿಪ್ರಾಯವೇ ನನ್ನ ನಿಲುವು,” ಎಂದು ಸಿಎಂ ಸ್ಪಷ್ಟಪಡಿಸಿದರು.
ಇನ್ನೂ ಬಲ್ಡೋಟಾ ಕಾರ್ಖಾನೆ ಯೋಜನೆ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿ ಇರುವುದರಿಂದ, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

[…] […]
[…] […]