ಶ್ಲೋಕ – 07 & 08
ಜಿತಾತ್ಮನಃ ಪ್ರಶಾಂತಸ್ಯ ಪರಮಾತ್ಮಾ ಸಮಾಹಿತಃ ।
ಶೀತೋಷ್ಣಸುಖದುಃಖೇಷು ತಥಾ ಮಾನಾಪಮಾನಯೋಃ ॥೭॥
ಜ್ಞಾನವಿಜ್ಞಾನತೃಪ್ತಾತ್ಮಾ ಕೂಟಸ್ಥೋ ವಿಜಿತೇಂದ್ರಿಯ।
ಯುಕ್ತ ಇತ್ಯುಚ್ಯತೇ ಯೋಗೀ ಸಮಲೋಷ್ಟಾಶ್ಮಕಾಂಚನಃ ॥೮॥
ಬಗೆಯನ್ನು[ಭಕ್ತಿಯಿಂದ ಭಗವಂತನನ್ನು] ಗೆಲಿದವನ, ವಿಷಯಗಳತ್ತ ಸುಳಿಯದೆ ಭಗವಂತನಲ್ಲೆ ನಲಿದವನ ಬಗೆಯಲ್ಲಿ ಭಗವಂತ ನೆಲೆಗೊಳ್ಳುತ್ತಾನೆ. ಅಂತವನು ತಂಪು –ಬಿಸಿ, ಸುಖ –ದುಃಖ ಮತ್ತು ಸಮ್ಮಾನ-ತಿರಸ್ಕಾರ ಇಂಥ ದ್ವಂದ್ವಗಳಲ್ಲಿ ನಿರ್ವಿಕಾರನಾಗಿ ನಿಲ್ಲಬಲ್ಲವನು ; ಭಗವಂತನ ಅರಿವು ಕಾಣ್ಕೆಗಳಿಂದ ಬಗೆದುಂಬಿದವನು; ಇಂದ್ರಿಯಗಳನ್ನು ಹಿಡಿತದಲ್ಲಿಟ್ಟವನು.
ಅವನಿಗೆ ಮಣ್ಣು, ಕಲ್ಲು, ಚಿನ್ನ ಎಲ್ಲ ಒಂದೆ. ಇಂಥ ಯೋಗ ಸಾಧಕನು ಗುರಿ ಸೇರಿದವನು ಎನ್ನಿಸುತ್ತಾನೆ. ಭಕ್ತಿಯಿಂದ ಭಗವಂತನ ಅನುಗ್ರಹ ಪಡೆದಾಗ ಮೊದಲು ಮನಸ್ಸು ಆತನಲ್ಲಿ ನೆಲೆ ನಿಲ್ಲುತ್ತದೆ. ಮನಸ್ಸು ಎಂಥಹ ಪ್ರಸಂಗದಲ್ಲೂ ಉದ್ವೇಗಗೊಳ್ಳುವುದಿಲ್ಲ.
“ಪರಮಾತ್ಮಾ ಸಮಾಹಿತಃ” –ಭಗವಂತ ಅವನ ಹೃದಯದಲ್ಲಿ ಬಂದು ನೆಲೆಸಿ ಬಿಡುತ್ತಾನೆ. ನಾವು ಬಯಸಿದಾಗ ಆತನ ಅಂತರ್ದರ್ಶನ ಸಾಧ್ಯ. ಈ ರೀತಿ ಭಗವಂತನನ್ನು ಕಾಣುವವರ, ಅಪರೋಕ್ಷ ಜ್ಞಾನದ ಪರಿಣಾಮ ಏನು ಎನ್ನುವುದನ್ನು ಇಲ್ಲಿ ಮತ್ತೊಮ್ಮೆ ವಿವರಿಸುತ್ತಾನೆ ಕೃಷ್ಣ.
ಮುಖ್ಯವಾಗಿ ಅಪರೋಕ್ಷ ಜ್ಞಾನಿಗಳಿಗೆ ಎಂದೂ ಇಂದ್ರಿಯ ಚಾಪಲ ಕಾಡುವುದಿಲ್ಲ.
ಅಪಮಾನಕ್ಕೆ ಆತ ಎಂದೂ ಕುಸಿಯುವುದಿಲ್ಲ. ಮಾನಾಪಮಾನ ಆತನಿಗೆ ದೊಡ್ಡ ಸಂಗತಿ ಆಗುವುದಿಲ್ಲ. ಈ ಸ್ಥಿತಿ ತಲುಪಿದವ ಸಿದ್ಧ ಎನಿಸುತ್ತಾನೆ. ಆತ ಎಷ್ಟು ನಿರ್ವೀಕಾರ ಎಂದರೆ ಆತ ಎಲ್ಲವನ್ನೂ ಸಮನಾಗಿ ಕಾಣಲಾರಂಭಿಸುತ್ತಾನೆ. ಧನ-ಕನಕ ಎಲ್ಲವೂ ಬೇಡವೆನಿಸಿ ಅದರಿಂದ ದೂರವಿರುತ್ತಾನೆ. (ರಾಮಕೃಷ್ಣ ಪರಮಹಂಸರ ಆತ್ಮಕಥೆಯನ್ನು ಓದಿದರೆ ಒಬ್ಬ ಅಪರೋಕ್ಷ ಜ್ಞಾನಿಯ ಮನಃಸ್ಥಿತಿ ನಮಗೆ ಅರ್ಥವಾಗುತ್ತದೆ).
ಮುಂದಿನ ಶ್ಲೋಕದಲ್ಲಿ ಕೃಷ್ಣ ಧ್ಯಾನಕ್ಕೆ ಪೂರ್ವಭಾವಿಯಾಗಿ ಒಬ್ಬ ಯೋಗಿಯ ಮನಃಸ್ಥಿತಿ ಹೇಗಿರಬೇಕು ಎನ್ನುವ ಬಹಳ ಮಹತ್ವವಾದ ವಿಚಾರವನ್ನು ವಿವರಿಸುತ್ತಾನೆ.
ಅರ್ಥ:
ಯಾರು ತಮ್ಮ ಮನಸ್ಸನ್ನು ಜಯಿಸಿರುವರೋ, ಅವರು ನಿಶ್ಚಲ ಮನಸ್ಸಿನವರಾಗಿ ಪರಮಾತ್ಮನೊಂದಿಗೆ ಏಕೀಭಾವ ಹೊಂದಿರುತ್ತಾರೆ. ಶೀತ-ಉಷ್ಣ, ಸುಖ-ದುಃಖ, ಮಾನ-ಅಪಮಾನ ಇಂತಹ ದ್ವಂದ್ವಗಳಲ್ಲಿ ಅವರು ಅಲುಗಾಡುವುದಿಲ್ಲ.
ಅರ್ಥ:
ಯಾರು ಜ್ಞಾನ ಮತ್ತು ವಿಜ್ಞಾನ (ಅಪರೋಕ್ಷ ಅನುಭವ)ದಿಂದ ತೃಪ್ತರಾಗಿರುವರೋ, ಇಂದ್ರಿಯಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಂಡು ಅಚಲಚಿತ್ತರಾಗಿರುವರೋ, ಅವರನ್ನೇ ನಿಜವಾದ ಯೋಗಿಯೆಂದು ಕರೆಯಲಾಗುತ್ತದೆ. ಅವರಿಗೆ ಮಣ್ಣು, ಕಲ್ಲು, ಚಿನ್ನ — ಎಲ್ಲವೂ ಸಮಾನ.

[…] […]