ತುಮಕೂರು: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಜಯಂತ್ ಕುಮಾರ್ ಅವರು ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿ, 3 ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದ್ದು, ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್(ಕೆಎಸ್ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್ಲೈನ್ ಮೂಲಕ ಕೂಡ ದಂಡ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
1991-92ರಿಂದ 2018-19ರ ಪೂರ್ವದಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ನಿಯಮ ಉಲ್ಲಂಘನೆ ಸಂಬಂಧ 3 ಲಕ್ಷ ಪ್ರಕರಣಗಳು ಬಾಕಿ ಇದ್ದು, ಈ ಕುರಿತು ದಂಡದ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡಿ ನವೆಂಬರ್ 21 ರಿಂದ ಡಿಸೆಂಬರ್ 12ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದರು.
ಕಳೆದ ಆಗಸ್ಟ್ನಲ್ಲಿ ಸಹ ಸಂಚಾರ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ವಿನಾಯ್ತಿ ನೀಡಲಾಗಿತ್ತು. ಆಗ ಜಿಲ್ಲೆಯಲ್ಲಿ 22ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಗೊಂಡು ಸುಮಾರು 6 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ. ಈಗ ಮತ್ತೆ ಹಳೇ ಸಂಚಾರ ಪ್ರಕರಣಗಳ ವಿಲೇವಾರಿಗೆ ದಂಡ ಪಾವತಿಸಲು ಅವಕಾಶ ಕೊಟ್ಟಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಹಾಜರಿದ್ದರು.
– ಕೆ.ಬಿ.ಚಂದ್ರಚೂಡ

[…] ಇದನ್ನು ಓದು: ತುಮಕೂರು: ಸಂಚಾರಿ ನಿಯಮ ಉಲ್ಲಂಘನೆ: ಶೇ.50 ದಂಡ… […]