ಕೊರಟಗೆರೆ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರಿಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿ, ಅವರ ಜನಪರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಕಳೆದ ಕೆಲವು ವರ್ಷಗಳಿಂದ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರ ನೇತೃತ್ವದಲ್ಲಿ ಆರೋಗ್ಯ ಕೇಂದ್ರದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ, ಅಗತ್ಯ ಔಷಧಿಗಳ ಲಭ್ಯತೆ, ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿಯ ಸಮನ್ವಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಈ ಆಸ್ಪತ್ರೆ ಸಾರ್ವಜನಿಕರ ವಿಶ್ವಾಸ ಗಳಿಸಿದೆ.
ಲೈನ್ಮ್ಯಾನ್ ರಮೇಶ್ ಮಾತನಾಡಿ, “ಡಾ. ಅಕ್ಷಯ್ ಅವರು ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ನಂತರ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಸರ್ಕಾರದಿಂದ ದೊರೆಯುವ ಆರೋಗ್ಯ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ರೋಗಿಗಳಿಗೆ ಅಗತ್ಯ ಔಷಧಿಗಳನ್ನು ಲಭ್ಯವಾಗುವಂತೆ ನೋಡಿಕೊಂಡಿದ್ದು, ಆಸ್ಪತ್ರೆಯ ಸ್ವಚ್ಛತೆ, ರೋಗಿಗಳ ಆರೈಕೆ, ವೈದ್ಯಕೀಯ ಮಾರ್ಗದರ್ಶನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಬದಲಾವಣೆ ಕಂಡುಬಂದಿದೆ. ಆದ್ದರಿಂದ ಅವರು ಸಾರ್ವಜನಿಕರ ಪಾಲಿಗೆ ‘ಜನಸ್ನೇಹಿ ವೈದ್ಯ’ರಾಗಿ ಗುರುತಿಸಿಕೊಂಡಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಕ್ಷಯ್, “ನನ್ನ ವೈದ್ಯಕೀಯ ಸೇವೆಯನ್ನು ತುಮಕೂರು ಜಿಲ್ಲೆಯಲ್ಲಿ ಆರಂಭಿಸಿದ್ದು ನನ್ನ ಭಾಗ್ಯ. ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರ ನನ್ನ ಎರಡನೇ ಕಾರ್ಯಕ್ಷೇತ್ರವಾಗಿರುವುದು ಹೆಮ್ಮೆಯ ವಿಷಯ. ಇಲ್ಲಿನ ಜನರು ವೈದ್ಯರ ಸಲಹೆಯನ್ನು ನಿಷ್ಠೆಯಿಂದ ಪಾಲಿಸುವುದರಿಂದ ಚಿಕಿತ್ಸೆಗೆ ಉತ್ತಮ ಸ್ಪಂದನೆ ದೊರೆಯುತ್ತದೆ. ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ತಂಡದ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಸಹಕರಿಸುತ್ತಿದ್ದಾರೆ” ಎಂದರು.
“ನನ್ನ ತಂದೆಯವರು ವೈದ್ಯಕೀಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರ ಆರೋಗ್ಯಕ್ಕಾಗಿ ದುಡಿದಿದ್ದಾರೆ. ಅವರ ಸೇವಾ ಮನೋಭಾವವೇ ನನಗೆ ಸ್ಫೂರ್ತಿ. ಮುಂದಿನ ದಿನಗಳಲ್ಲಿಯೂ ಬಡವರು ಹಾಗೂ ಗ್ರಾಮೀಣ ಜನರಿಗೆ ಪ್ರಾಮಾಣಿಕ, ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನನ್ನ ಪ್ರಮುಖ ಗುರಿಯಾಗಿದೆ” ಎಂದು ಅವರು ತಿಳಿಸಿದರು
ವರದಿ- ನರಸಿಂಹಯ್ಯ ಹೊಸಕೋಟೆ
