ಬೆಂಗಳೂರು: ಮುಂದಿನ ಆರು ವಾರಗಳಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಬೈಕ್ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ದ್ವಿಚಕ್ರವನ್ನು ಸಾರಿಗೆ ವಾಹನಗಳಾಗಿ ಪರಿವರ್ತಿಸಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲಾ ಅರ್ಜಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ವಜಾಗೊಳಿಸಿ , ಬೈಕ್ ಟ್ಯಾಕ್ಸಿಗಳ ಎಲ್ಲಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಓಲಾ, ಉಬರ್ ಮತ್ತು ರ್ಯಾಪಿಡೋಗಳಿಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರ ಈ ವಿಚಾರದಲ್ಲಿ ವಾದ ಮಂಡಿಸಿ ಅನುಮತಿ ನೀಡಲು ಸಾಧ್ಯವಿಲ್ಲ ಎಂಬುದಕ್ಕೆ ಹೈಕೋರ್ಟ್ಗೆ ಮನದಟ್ಟು ಮಾಡಿತು. ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ನೀಡಿದ ಮಧ್ಯಂತರ ಆದೇಶದ ಆಧಾರದ ಮೇಲೆ ಓಲಾ, ಉಬರ್ ಮತ್ತು ರ್ಯಾಪಿಡೊ ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸುತ್ತಿವೆ ಎಂಬ ಅಂಶಗಳನ್ನು ಗಮನಿಸಿತು. ಇಂದಿನಿಂದ ಆರು ವಾರಗಳ ಕಾಲ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ ಮತ್ತು ಆರು ವಾರಗಳ ನಂತರ ಇದನ್ನು ನಿಷೇಧಿಸಬೇಕೆಂದು ಹೇಳಿತು. ಜೊತೆಗೆ ರಾಜ್ಯ ಸರ್ಕಾರ ಇದನ್ನು ಖಚಿತಪಡಿಸಬೇಕೆಂದು ಕೂಡ ನ್ಯಾಯಾಲಯ ಹೇಳಿದೆ.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು, ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡುವ ಸಂಗ್ರಾಹಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಮತ್ತು ಕರ್ನಾಟಕ ಮೋಟಾರು ವಾಹನ ನಿಯಮಗಳ ಪ್ರಕಾರ ಬಿಳಿ ನಂಬರ್ ಪ್ಲೇಟ್ಗಳನ್ನು ಹೊಂದಿರುವ ದ್ವಿಚಕ್ರ ವಾಹನಗಳು ವಾಣಿಜ್ಯ ಕಾರ್ಯಾಚರಣೆಯನ್ನು ನಡೆಸಲು ಸಾಧ್ಯವಿಲ್ಲದ ಕಾರಣ ಬೈಕ್ ಟ್ಯಾಕ್ಸಿಗಳು ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ವಾದಿಸಿತ್ತು. ಇದನ್ನು ಪರಿಗಣಿಸಿರುವ ನ್ಯಾಯಾಲಯ ಸಾಧ್ಯವಿಲ್ಲ ಎಂಬ ಆದೇಶ ನೀಡಿದೆ.
