ಅಧ್ಯಾಯ-1
ಶ್ಲೋಕ – 47
ಏವಮುಕ್ತ್ವಾsರ್ಜುನಃ ಸಂಖೇ ರಥೋಪಸ್ಥ ಉಪಾವಿಶತ್ ।
ವಿಸೃಜ್ಯ ಸಶರಂ ಚಾಪಂ ಶೋಕಸಂವಿಗ್ನಮಾನಸಃ ॥೪೭॥
ಸಂಜಯ ಉವಾಚ -ಸಂಜಯ ಹೇಳಿದನು:
ಏವಮ್ ಉಕ್ತ್ವಾ ಅರ್ಜುನಃ ಸಂಖೇ ರಥ ಉಪಸ್ಥೇ ಉಪಾವಿಶತ್ ವಿಸೃಜ್ಯ ಸಶರಮ್ ಚಾಪಮ್ ಶೋಕ ಸಂವಿಗ್ನ ಮಾನಸಃ- ಕಾಳಗದ ಕಣದಲ್ಲಿ ಅರ್ಜುನ ಬಿಲ್ಲು ಬಾಣಗಳನ್ನು ಬಿಸುಟು, ಅಳಲಿನಿಂದ ತಳಮಳಿಸುತ್ತ ತೇರ ಮಡಿಲಲ್ಲಿ ಕುಳಿತುಬಿಟ್ಟ.
ರಥದಲ್ಲೇ ನಿಂತು ಇಷ್ಟು ಮಾತನಾಡಿದ ಅರ್ಜುನ,ರಥದ ಮಧ್ಯದಲ್ಲಿ ಕುಸಿದು ಕುಳಿತುಬಿಟ್ಟ. ತನ್ನೆಲ್ಲಾ ಶಸ್ತ್ರಾಸ್ತ್ರಗಳನ್ನು ಕೆಳಗೆ ಬಿಟ್ಟು ಕೈಚಲ್ಲಿ ಕುಳಿತು ಬಿಟ್ಟ.
ಈ ಅಧ್ಯಾಯದಲ್ಲಿ ಅರ್ಜುನ ತನ್ನೆಲ್ಲ ಭಾವನೆಗಳನ್ನು ಕೃಷ್ಣನ ಮುಂದೆ ಬಿಚ್ಚಿಟ್ಟಿದ್ದಾನೆ. ಅರ್ಜುನ ಮಾತನಾಡಿದ ಪ್ರತಿಯೊಂದು ವಿಷಯ ನಮಗೆ ತಿಳಿದ ವಿಷಯ. ಆದರೆ ಮುಂದೆ ಕೃಷ್ಣ ಹೇಳುವುದು ನಮಗೆ ತಿಳಿಯದ್ದು. ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಭಗವಂತನ ಉತ್ತರವನ್ನು ಮುಂದಿನ ಅಧ್ಯಾಯಗಳಲ್ಲಿ ನೋಡೋಣ.
ಮುಂದಿನ ಅಧ್ಯಾಯಕ್ಕೆ ಹೋಗುವ ಮುನ್ನ ಒಂದು ಪುಟ್ಟ ವಿಶ್ಲೇಷಣೆ. ನಮ್ಮಲ್ಲಿ ಹೆಚ್ಚಿನವರಿಗೆ ಒಂದು ಅನುಮಾನವಿದೆ. “ಯುದ್ಧ ಭೂಮಿಯಲ್ಲಿ ಶ್ರೀಕೃಷ್ಣ ಮತ್ತು ಅರ್ಜುನ ಹೇಗೆ ಈ ಏಳುನೂರು ಶ್ಲೋಕಗಳ ಸಂಭಾಷಣೆ ಮಾಡಿದರು? ಅವರಿಗೆ ಅಷ್ಟು ಸಮಯ ಇತ್ತೇ?” ಎಂದು. ಈ ಪ್ರಶ್ನೆಗೆ ಉತ್ತರ ದೊರೆಯಬೇಕಾದರೆ ಮೊದಲು ನಾವು ಮಹಾಭಾರತ ಕಾಲದ ಯುದ್ಧ ಪದ್ಧತಿಯನ್ನು ತಿಳಿದಿರಬೇಕು. ಆಗಿನ ಕಾಲದ ಯುದ್ಧ ನಿಯಮದ ಪ್ರಕಾರ ಯುದ್ಧದಲ್ಲಿ ಎದುರಾಳಿ ಸಿದ್ಧವಿಲ್ಲದಿದ್ದರೆ ಅವನ ಮೇಲೆ ಆಕ್ರಮಣ ಮಾಡುವಂತಿರಲಿಲ್ಲ. ಒಬ್ಬ ಸಜ್ಜಾಗಿ ನಿಲ್ಲದೆ ಯುದ್ಧ ಪ್ರಾರಂಭವಾಗುತ್ತಿರಲಿಲ್ಲ. ಇನ್ನು ಎಷ್ಟು ಹೊತ್ತು ಅವರ ಸಂಭಾಷಣೆ ನಡೆಯಿತು ಎನ್ನುವ ಪ್ರಶ್ನೆ. ಅರ್ಜುನ ಆ ಕಾಲದ ಮಹಾಮೇಧಾವಿಗಳಲ್ಲಿ ಒಬ್ಬ. ಇಲ್ಲಿ ಸಂಭಾಷಣೆ ನೆಡೆಯುತ್ತಿರುವುದು ಇಬ್ಬರು ಮೇಧಾವಿಗಳ ನಡುವೆ. ಆ ಮಟ್ಟದ ಜ್ಞಾನವನ್ನು ಇದು ನಾವು ಊಹಿಸುವುದೂ ಕಷ್ಟ. ಅವರ ಸಂಪೂರ್ಣ ಸಂಭಾಷಣೆ ನಡೆದಿದ್ದು ಇಂದಿನ ಈ ಏಳುನೂರು ಶ್ಲೋಕ ರೂಪದಲ್ಲಿ ಅಲ್ಲ. ವೇದವ್ಯಾಸರು ಅವರ ಸಂಭಾಷಣೆಯನ್ನು ನಮಗೆ ಅರ್ಥವಾಗುವಂತೆ ಏಳುನೂರು ಶ್ಲೋಕ ರೂಪದಲ್ಲಿ ನಮ್ಮ ಮುಂದಿಟ್ಟಿದ್ದಾರೆ ಅಷ್ಟೆ. ಇಂದು ನಮಗೆ ಈ ಶ್ಲೋಕ ಕೂಡಾ ಅರ್ಥವಾಗುವುದಿಲ್ಲ. ಅದಕ್ಕಾಗಿ ನಾವು ಗೀತೆಯ ಭಾಷ್ಯವನ್ನು ಸಾವಿರಾರು ಪುಟಗಳಲ್ಲಿ ಕಾಣುತ್ತೇವೆ. ಆದರೆ ಮಹಾ ಮೇಧಾವಿಗಳು ಇದನ್ನು ಅತೀ ಸಂಕ್ಷಿಪ್ತವಾಗಿ ಅತೀ ಕಡಿಮೆ ಸಮಯದಲ್ಲಿ ಹೇಳಬಲ್ಲರು ಹಾಗು ಅರ್ಥ ಮಾಡಿಕೊಳ್ಳಬಲ್ಲರು. ಕೃಷ್ಣ ಮತ್ತು ಅರ್ಜುನರ ನಡುವೆ ನಡೆದ ಸಂಭಾಷಣೆ ಕೂಡಾ ಇಂತಹ ವಿಷಯಭರಿತ ಸಂಕ್ಷಿಪ್ತ ಸಂಭಾಷಣೆ.
ಇನ್ನೊಂದು ಮುಖ್ಯ ವಿಷಯ ಎಂದರೆ ಗೀತೆಯನ್ನು ಕೃಷ್ಣ ಅರ್ಜುನನಿಗೇ ಏಕೆ ಹೇಳಿದ? ಆತನ ಅಣ್ಣ ಭೀಮನಿಗೆ ಅಥವಾ ಇತರರಿಗೆ ಏಕೆ ಹೇಳಲಿಲ್ಲ? ಎನ್ನುವ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಅತಿ ಸುಲಭ. ರೋಗ ಬಂದವನಿಗೆ ಮದ್ದೇ ಹೊರತು ಇತರರಿಗಲ್ಲ. ಅಲ್ಲಿ ಮಾನಸಿಕವಾಗಿ ಆಂತರಿಕ ತುಮುಲದಲ್ಲಿದ್ದವನು ಅರ್ಜುನ ಮಾತ್ರ. ಅದಕ್ಕಾಗಿ ಶ್ರೀಕೃಷ್ಣ ಅರ್ಜುನನಿಗೆ (ಆತನ ಮುಖೇನ ನಮಗೆ) ಗೀತೋಪದೇಶ ಮಾಡಿದ.
ಮೊದಲನೇ ಅಧ್ಯಾಯ ಮುಗಿಯಿತು.
