ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮಾದಾಪುರ ಕೆರೆಯಲ್ಲಿ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕಾಲದ ಶಿಲಾಶಾಸನ ಪತ್ತೆಯಾಗಿದೆ ಎಂದು ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ. ಆರ್.ಶೇಜೇಶ್ವರ ತಿಳಿಸಿದ್ದಾರೆ. ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣನ್ನು ತೆಗೆಯುವಾಗ ಶಿಲಾ ಶಾಸನ ಪತ್ತೆಯಾಗಿದೆ. ಇಲ್ಲಿಗೆ ಪುರಾತತ್ವ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದ ನಂತರ ಇದು ಬಾದಾಮಿ ಚಾಲುಕ್ಯರ ಶಿಲಾಶಾಸನವಾಗಿದೆ ಎಂದು ತಿಳಿದುಬಂದಿದೆ.
ಕ್ರಿ.ಶ 654-681 ಕಾಲದ ಶಾಸನ: ಶಾಸನವು 5 ಅಡಿ ಉದ್ದವಿದ್ದು, ಹಳೆಗನ್ನಡದ 17 ಸಾಲುಗಳನ್ನು ಒಳಗೊಂಡಿದೆ. ಇದು ಕ್ರಿ.ಶ 7ನೇ ಶತಮಾನದ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯನ ಕ್ರಿ.ಶ.654-681 ಕಾಲದ ಶಾಸನವಾಗಿದೆ. ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದಾಗ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದು ಹಾಗೂ ಕೆರೆಯನ್ನು ನಿರ್ಮಿಸಿದ ರಾಜರಿಗೆ ಆರು ಎಕರೆ ಭೂಮಿ ದಾನ ನೀಡಿರುವುದು ಹಾಗೂ ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕಲುಗಳಿಗೆ ಸಲ್ಲುತ್ತೆಂದು ಉಲ್ಲೇಖಿಸಲಾಗಿದೆ.
ಈ ಶಾಸನ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳಿದ್ದ ಆಡಳಿತ ವಿಭಾಗದ ಪ್ರಾಚೀನತೆಯನ್ನು ಹಾಗೂ 1344 ವರ್ಷಗಳ ಪುರಾತನವಾದ ಶಾಸನ ಎಂಬುವುದು ತಿಳಿಸುತ್ತದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ರಿ.ಶ.17 ನೇ ಶತಮಾನದಲ್ಲಿ ಅಪೂರ್ಣ ಉಬ್ಬು ಶಿಲ್ಪವಿದೆ.
