ಬೆಂಗಳೂರು: ಮೂವರು ಪತ್ನಿಯರು, ಒಂಬತ್ತು ಮಕ್ಕಳಿದ್ದ ಸಂಸಾರ ಸಾಗಿಸಲು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಠಾಣಾ ವ್ಯಾಪ್ತಿಯ ಶಿಕಾರಿಪಾಳ್ಯದ ಬಾಬಾಜಾನ್ (36) ಬಂಧಿತ ಆರೋಪಿ.
ಆರೋಪಿ ತನ್ನ 16 ವರ್ಷದ ಮಗನ ಜೊತೆಗೆ ಸೇರಿಕೊಂಡು ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಆರೋಪಿಯಿಂದ 188 ಗ್ರಾಂ ಚಿನ್ನಾಭರಣ, 550 ಗ್ರಾಂ ಬೆಳ್ಳಿಯ ವಸ್ತುಗಳು, ₹1,500 ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ಮೌಲ್ಯ ₹16.50 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಠಾಣಾ ವ್ಯಾಪ್ತಿಯ ಬೆಟ್ಟದಾಸಪುರದ ನಿವಾಸಿಯೊಬ್ಬರು ನೀಡಿದ ದೂರು ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಲಾಯಿತು.
ದೂರುದಾರರು ತಮ್ಮ ಮನೆಯ ಮಹಡಿಯಲ್ಲಿ ಬಟ್ಟೆ ಒಣಗಿಸಲು ತೆರಳಿದ್ದಾಗ, ಆರೋಪಿ ಮನೆಗೆ ನುಗ್ಗಿ ಚಿನ್ನ, ಬೆಳ್ಳಿಯ ವಸ್ತು ಹಾಗೂ ನಗದು ಕಳ್ಳತನ ಮಾಡಿಕೊಂಡು ಬಟ್ಟೆಯಲ್ಲಿ ಬಚ್ಚಿಟ್ಟುಕೊಂಡು ಪರಾರಿ ಆಗಿದ್ದ ಎಂದು ಮೂಲಗಳು ತಿಳಿಸಿವೆ.
‘ಚಿಕ್ಕಬಳ್ಳಾಪುರ ಜಿಲ್ಲೆಯ ಶಿಢ್ಲಘಟ್ಟದ ನಿವಾಸಿ ಬಾಬಾಜಾನ್, ಶಿಕಾರಿಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲಸಿದ್ದ. ಆರೋಪಿ ಮೂವರು ಮಹಿಳೆಯರನ್ನು ಮದುವೆ ಆಗಿದ್ದ. ಒಂಬತ್ತು ಮಕ್ಕಳಿದ್ದಾರೆ. ಮೊದಲ ಪತ್ನಿ ಶ್ರೀರಂಗಪಟ್ಟಣ, ಎರಡನೇ ಪತ್ನಿ ಶಿಕಾರಿಪಾಳ್ಯ ಹಾಗೂ ಮೂರನೇ ಪತ್ನಿ ಶಿಡ್ಲಘಟ್ಟದವರು. ಮೈಲಸಂದ್ರದ ಬಳಿ ಅನುಮಾನಸ್ಪದವಾಗಿ ಓಡಾಟ ನಡೆಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ’ ಎಂದು ಮೂಲಗಳು ತಿಳಿಸಿವೆ.
‘ಒಂಬತ್ತು ಮಕ್ಕಳಿದ್ದ ಕಾರಣಕ್ಕೆ ಸಂಸಾರ ಸಾಗಿಸುವುದು ಕಷ್ಟವಾಗಿತ್ತು. ಹೀಗಾಗಿ ಕಳ್ಳತನ ಮಾಡುತ್ತಿದ್ದೆ. ಬೀಗ ಹಾಕಿದ ಮನೆಗಳನ್ನು ಗುರುತಿಸಿ, 16 ವರ್ಷದ ಮಗನ ಜೊತೆಗೆ ಸೇರಿಕೊಂಡು ಹಣ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದೆ ಎಂಬುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಆರೋಪಿ ಬಂಧನದಿಂದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಏಳು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಮನೆ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಹಾಗೂ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಕೆ.ಎಂ.ಸತೀಶ್ ಅವರ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಿ.ಎಂ.ನವೀನ್ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಆರೋಪಿಯಿಂದ ಜಪ್ತಿ ಮಾಡಿಕೊಂಡು ಚಿನ್ನಾಭರಣವನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಪರಿಶೀಲನೆ ನಡೆಸಿದರು
ಬಾಬಾಜಾನ್ ಬಂಧನದಿಂದ 9 ಪ್ರಕರಣ ಪತ್ತೆ
