ಬೆಂಗಳೂರು : ರಾಜ್ಯ ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಸೇವೆಗೆ 24 ತಾಸಿನಲ್ಲೇ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಪ್ರಶೋತ್ತರ ವೇಳೆಯಲ್ಲಿ ಬಿಜೆಪಿಯ ಡಾ।ವೈ.ಭರತ್ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಹೊಸದಾಗಿ ಕಳೆದ ಹಲವು ವರ್ಷಗಳಿಂದ ಬಿಪಿಎಲ್ ಕಾರ್ಡ್ ನೀಡುತ್ತಿಲ್ಲ. ಇದರಿಂದ ಲಕ್ಷಾಂತರ ಮಂದಿ ಬಡವರಿಗೆ ವೈದ್ಯಕೀಯ ತುರ್ತು ಸೇವೆ ಸಿಗದಂತೆ ಪರದಾಡುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ರಾಜ್ಯದಲ್ಲಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲು ಅನರ್ಹ 13 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಪ್ರತಿಪಕ್ಷ ಸದಸ್ಯರು ಒಪ್ಪಿದರೆ ಕಾರ್ಯಾಚರಣೆ ಶುರು ಮಾಡುತ್ತೇವೆ. ಅಲ್ಲಿಯವರೆಗೆ ವೈದ್ಯಕೀಯ ತುರ್ತು ಅಗತ್ಯಗಳಿಗೆ ಬಿಪಿಎಲ್ ಅಡಿ ಸೇವೆ ಪಡೆಯಲು 24 ಗಂಟೆಗಳಲ್ಲಿ ಕಾರ್ಡ್ ನೀಡಲು ಪ್ರತ್ಯೇಕ ಪೋರ್ಟಲ್ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
