ನವದೆಹಲಿ: ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಲೇ ಬೇಹುಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತವು ಹುದ್ದೆಯಿಂದ ಕಿತ್ತುಹಾಕಿದೆ. ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬನ ಮೇಲೆ ಈ ಕ್ರಮ ಜಾರಿಯಾಗಿದ್ದು, ದೇಶ ತೊರೆಯಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ.
ಇದರ ಬೆನ್ನಲ್ಲೇ, ಇಸ್ಲಾಮಾಬಾದ್ನಲ್ಲಿರುವ ಭಾರತದ ಹೈಕಮಿಷನ್ನಲ್ಲಿನ ಸಿಬ್ಬಂದಿಯನ್ನು ಸಹ ಬೇಹುಗಾರಿಕೆ ಆರೋಪದ ಒಪ್ಪಿಕೊಳ್ಳಲಾಗದ ವ್ಯಕ್ತಿ ಎಂದು ಘೋಷಿಸಿ, ಆ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತಿಳಿಸಿದೆ. ಅಧಿಕಾರಿ ಮತ್ತು ಕುಟುಂಬ ಸದಸ್ಯರಿಗೆ 24 ಗಂಟೆಗಳಲ್ಲಿ ಪಾಕಿಸ್ತಾನವನ್ನು ತೊರೆಯುವಂತೆ ತಿಳಿಸಲಾಗಿದೆ ಎಂದು ಅದು ಹೇಳಿದೆ.
ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಮಿಲಿಟರಿ ಮುಖಾಮುಖಿಯ ಬಳಿಕ ಉಭಯ ದೇಶಗಳ ನಡುವೆ ಹೆಚ್ಚಿದ ಉದ್ವಿಗ್ನತೆಯ ನಡುವೆ ಪರಸ್ಪರ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನಿ ಪ್ರಜೆಯ ವಿರುದ್ಧದ ನಿರ್ದಿಷ್ಟ ಆರೋಪಗಳನ್ನು ವಿದೇಶಾಂಗ ಸಚಿವಾಲಯ ಬಹಿರಂಗಪಡಿಸದಿದ್ದರೂ, ಇದು ಪಂಜಾಬ್ ಪೊಲೀಸರು ತನಿಖೆ ನಡೆಸುತ್ತಿರುವ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ಭಾರತದಲ್ಲಿ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಅಧಿಕಾರಿಗೆ 24 ಗಂಟೆಗಳ ಒಳಗೆ ಭಾರತ ತೊರೆಯುವಂತೆ ಸೂಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನಾ ಚಲನವಲನಗಳ ಬಗ್ಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗೆ ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ್ದಕ್ಕಾಗಿ ಶಂಕಿತನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ.
ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಸೋರಿಕೆ ಮಾಡಿದ ಆರೋಪದ ಮೇಲೆ ಅಮೃತಸರ ಗ್ರಾಮೀಣ ಪೊಲೀಸರು ಫಲಕ್ಷೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂಬ ಇಬ್ಬರನ್ನು ಬಂಧಿಸಿದ ಕೆಲ ದಿನಗಳಲ್ಲೇ ಈ ಬೆಳವಣಿಗೆ ಕಂಡುಬಂದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
