ಚಾಮರಾಜನಗರ, ಜೂನ್ 08: ಚಾಮರಾಜನಗರ ಜಿಲ್ಲೆಯಾಗಿ ಬರೋಬ್ಬರಿ 28 ವರ್ಷಗಳ ನಂತರ ಸರ್ಕಾರಿ ಕಾನೂನು ಕಾಲೇಜು ಆರಂಭಕ್ಕೆ ಭಾರತೀಯ ವಕೀಲ ಪರಿಷತ್ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಕಾನೂನು ಪದವಿ ವ್ಯಾಸಂಗಕ್ಕೆ ದೂರದ ಮೈಸೂರು (Mysore) ಮತ್ತು ಬೆಂಗಳೂರು (Bengaluru) ಜಿಲ್ಲೆಗಳಿಗೆ ಹೋಗಬೇಕಿದ್ದ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ಶುಲ್ಕದೊಂದಿಗೆ ಕಾನೂನು ಪದವಿ ವ್ಯಾಸಂಗ ಮಾಡುವ ಅವಕಾಶ ದೊರೆತಂತಾಗಿದೆ.
1997 ರಲ್ಲಿ ಪ್ರತ್ಯೇಕ ಜಿಲ್ಲೆಯಾದ ಚಾಮರಾಜನಗರದಲ್ಲಿ ಇದುವರೆಗೂ ಕಾನೂನು ಕಾಲೇಜು ಇರಲಿಲ್ಲ. ಇಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ, ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಇದೆ. ಆದರೆ ಕಾನೂನು ಪದವಿ ವ್ಯಾಸಂಗ ಮಾಡಲು ಇಲ್ಲಿನ ವಿದ್ಯಾರ್ಥಿಗಳು ದೂರದ ಮೈಸೂರು, ಬೆಂಗಳೂರು ಜಿಲ್ಲೆಗಳಿಗೆ ಹೋಗುವ ಅನಿವಾರ್ಯತೆ ಇತ್ತು. ಖಾಸಗಿ ಕಾನೂನು ಕಾಲೇಜುಗಳಲ್ಲಿ ಲಕ್ಷಾಂತರ ರೂಪಾಯಿ ಶುಲ್ಕ ಇರುವುದರಿಂದ ಎಷ್ಟೋ ಮಂದಿ ವಿದ್ಯಾರ್ಥಿಗಳು ಕಾನೂನು ಪದವಿ ವ್ಯಾಸಂಗದಿಂದ ವಂಚಿತರಾಗುತ್ತಿದ್ದರು.
ಇದನ್ನು ಮನಗಂಡ ಹಿಂದೆ ಸಂಸದರಾಗಿದ್ದ ಆರ್ ಧ್ರುವನಾರಾಯಣ ಅವರ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸರ್ಕಾರಿ ಕಾನೂನು ಕಾಲೇಜು ಮಂಜೂರಾಗಿತ್ತು. ಆದರೆ, ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಕಾನೂನು ಕಾಲೇಜು ಆರಂಭಕ್ಕೆ ಭಾರತೀಯ ವಕೀಲರ ಪರಿಷತ್ ನಿರ್ಬಂಧ ಹೇರಿತ್ತು. ಕಳೆದ ಆರು ತಿಂಗಳ ಹಿಂದಷ್ಟೇ ಪ್ರಾಂಶುಪಾಲರಾಗಿ ನೇಮಕಗೊಂಡ ಲಲಿತಾಬಾಯಿ ವೈಯಕ್ತಿಕವಾಗಿ ಮುತುವರ್ಜಿ ವಹಿಸಿ ಕಾನೂನು ಕಾಲೇಜು ಆರಂಭಕ್ಕೆ ಭಾರತೀಯ ವಕೀಲರ ಪರಿಷತ್ನಿಂದ ಅನುಮತಿ ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
