
ಕರ್ನಾಟಕ: ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.
ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ: ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.
ಬಾಗಲಕೋಟೆಯಲ್ಲಿ ಲೋಕಾ ದಾಳಿ, ದಾಖಲೆಗಳ ಪರಿಶೀಲನೆ: ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ತುಮಕೂರಿನಲ್ಲಿ ವೈದ್ಯ ಡಾ.ಜಗದೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯಲ್ಲಿರುವ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯನಾಗಿರುವ ಜಗದೀಶ್ ಅವರು ತುಮಕೂರಿನ ಮಂಜುನಾಥ್ ನಗರದಲ್ಲಿ ಹೊಂದಿರುವ ಜಗದೀಶ್ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಗದೀಶ್ ಪತ್ನಿ ರೂಪಾ, ಸೋದರ ಕಾಂತರಾಜ್ ಮನೆ ಮೇಲೂ ರೇಡ್ ಮಾಡಲಾಗಿದೆ.