ಬೆಂಗಳೂರಿನಲ್ಲಿ ಭಾರೀ ಮಳೆಯ ಬೆನ್ನಲ್ಲೇ ಪಾರ್ಕಿಂಗ್ಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಯನ್ನು ಮಾಡಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕೆರೆಗಳ ಸಮೀಪದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನಗಳನ್ನು ನಿಲ್ಲಿಸುವುದಕ್ಕೆ ಅವಕಾಶ ನೀಡದಂತೆ ಮುಂದಿನ ದಿನಗಳಲ್ಲಿ ಕಾನೂನು ರೂಪಿಸಲಾಗುವುದು.
ಬೆಂಗಳೂರಿನಲ್ಲಿ ಮಳೆ ಕಡಿಮೆಯಾದ ಮೇಲೆ ಈ ಬಗ್ಗೆ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಮಳೆಯಿಂದಾಗಿ ಬೆಂಗಳೂರಿನಲ್ಲಿನ ತಗ್ಗು ಪ್ರದೇಶಗಳು ಹಾಗೂ ಪಾರ್ಕಿಂಗ್ ಪ್ರದೇಶಗಳಲ್ಲಿ ಭಾರೀ ಹಾನಿಯಾಗಿರುವುದರಿಂದ ಹೊಸ ಕಾನೂನು ರೂಪಿಸುವುದಕ್ಕೆ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ.
ಭಾರೀ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎಂಬುವವರು ಮೃತಪಟ್ಟಿದ್ದರು. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಮೇಲೆ ಮಾತನಾಡಿರುವ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರಿನಲ್ಲಿ ಅಂಡರ್ ಗ್ರೌಂಡ್ ಹೊರತುಪಡಿಸಿ ನೆಲ ಮಹಡಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಇರುವಂತೆ ಯೋಜನೆ ರೂಪಿಸುವ ಬಗ್ಗೆ ಚಿಂತನೆ ಇದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ ಮಾಡಿಕೊಳ್ಳಲಿ ಅಂತ ಹೇಳಿದ್ದಾರೆ.
ಇನ್ನು ಅಂಡರ್ ಗ್ರೌಂಡ್ನಲ್ಲಿ ಸಂಗ್ರಹವಾಗಿದ್ದ ನೀರನ್ನು ಪಂಪ್ ಮೂಲಕ ಖಾಲಿ ಮಾಡುವಾಗ ಅಧಿಕಾರಿಗಳು, ಪೊಲೀಸ್ ಹಾಗೂ ಸಹಾಯ ಮಾಡಲು ಬಂದ ವ್ಯಕ್ತಿಗಳಿಗೂ ವಿದ್ಯುತ್ ಆಘಾತವಾಗಿದೆ. ಈ ವೇಳೆ ಮೃತಪಟ್ಟವರಿಗೆ ಪರಿಹಾರ ನೀಡಲಾಗುವುದು. ಮಳೆಯಿಂದ ಸಂಭವಿಸಿದ ಅವಘಡದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಜಾನುವಾರುಗಳು ಸಹ ಮೃತಪಟ್ಟಿದ್ದು ಇದಕ್ಕೂ ಪರಿಹಾರ ನೀಡಲಾಗುವುದು. ನಮ್ಮ ಅಧಿಕಾರಿಗಳಿಗೆ ದಿನಪೂರ್ತಿ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಇನ್ನು ನಗರದಲ್ಲಿ ಸುರಿದ ಮಳೆ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು (ಬಿಬಿಎಂಪಿ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ( ಬಿ.ಡಬ್ಲೂ.ಎಸ್.ಎಸ್.ಬಿ) ಅವರಿಂದ ಸರಿಯಾದ ಪ್ರತಿಕ್ರಿಯೆ ದೊರೆಯುತ್ತಿಲ್ಲ ಎನ್ನುವ ಸಾರ್ವಜನಿಕರ ದೂರಿನ ಬಗ್ಗೆ ಕೇಳಿದಾಗ, ಬೆಂಗಳೂರಿನ ಜನಸಂಖ್ಯೆಯು 1.40 ಕೋಟಿ ಇದೆ. ವಾರ್ ರೂಮ್ನಲ್ಲಿ ಹೇಗೆ ಕೆಲಸ ನಡೆಯುತ್ತದೆ ಎಂದು ಮಾಧ್ಯಮದವರೇ ಬಂದು ನೋಡಬಹುದು. ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮಳೆ ಬಂದು ಅವಘಡ ಉಂಟಾಗಿರುವ ಭಾಗದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದಾರೆ. ವಾರ್ ರೂಮ್ ಮೂಲಕವೂ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎಂದು ಹೇಳಿದ್ದಾರೆ.
